ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಈ ವರ್ಷದ ನಾಲ್ಕು ತಿಂಗಳಲ್ಲಿಯೇ ಅತೀ ಹೆಚ್ಚು ಕೋವಿಡ್ ಪ್ರಕರಣ ಶುಕ್ರವಾರ ದಾಖಲಾಗಿದೆ. 48 ಗಂಟೆಗಳ ಅವಧಿಯಲ್ಲಿ ಪರೀಕ್ಷೆ ಮಾಡಿದ 256 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶುಕ್ರವಾರ ಜಿಲ್ಲೆಯಲ್ಲಿ ಕೊರೊನಾ ಗುಣಮುಖರಾಗಿ 92 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 37,562 ಮಂದಿ ಕೊರೊನಾ ಸೋಂಕಿಗೊಳಗಾಗಿದ್ದು, ಈ ಪೈಕಿ 35,405 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1414 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಟೈನ್ಮೆಂಟ್ ವಲಯ ಘೋಷಣೆ ಮಂಗಳೂರು ನಗರದ ಕಾನ್ವೆಂಟ್ ಒಂದರಲ್ಲಿ ಹತ್ತು ದಿನದ ಹಿಂದೆ ಒಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಅವರ ಪ್ರಾಥಮಿಕ ಸಂಪರ್ಕವುಳ್ಳ 59 ಮಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಿದ್ದು, ಸದ್ಯ 19 ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಪರಿಣಾಮ ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಅದೇ ರೀತಿ, ನೀರುಮಾರ್ಗ ಬಳಿ ಮನೆಯೊಂದರ ಐದು ಮಂದಿಗೆ ಕೊರೊನಾ ದೃಢಪಟ್ಟಿದ್ದು, ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ. ಸಚಿವರ ಸಭೆಶುಕ್ರವಾರ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವರ್ಚುವಲ್ ಸಭೆಯನ್ನು ನಡೆಸುವ ಮೂಲಕ ಕೋವಿಡ್ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಲಸಿಕೆಯ ಪ್ರಗತಿಯ ವಿವರವನ್ನು ಪಡೆದುಕೊಂಡರು. ದ.ಕ.ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಏ.17ರಂದು ಬೆಳಗ್ಗೆ 9ಕ್ಕೆ ಜಿ.ಪಂ. ಸಭಾಂಗಣದಲ್ಲಿ ಕೋವಿಡ್ ರೋಗಿಗಳಿರುವ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಯಲಿದೆ. ಇದೇ ವೇಳೆಯಲ್ಲಿ ಕೋವಿಡ್ ನೋಡಲ್ ಅಧಿಕಾರಿಗಳ ಸಭೆಯನ್ನು ಕೂಡ ಆಯೋಜನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ.
from India & World News in Kannada | VK Polls https://ift.tt/3e2P5By