ಬೆಂಗಳೂರು: ನಗರದಲ್ಲಿ ಕೋವಿಡ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಕೋವಿಡ್ ಅಟ್ಟಹಾಸ ನಿಯಂತ್ರಣ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಸ್ಥಿತಿಗತಿಗಳ ಕುರಿತಾಗಿ ಚರ್ಚೆ ನಡೆಯಲಿದೆ. ಈ ಸಭೆಯ ಬಳಿಕ ಸರ್ಕಾರ ಸೂಕ್ತ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಏನೆಲ್ಲಾ ಕಠಿಣ ರೂಲ್ಸ್ ಜಾರಿ? ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಈಗಾಗಲೇ ಕೆಲವೊಂದು ಬಿಗಿ ನಿಯಮಗಳು ಜಾರಿಯಲ್ಲಿವೆ. ಈ ಪೈಕಿ ಮದುವೆ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ. ಒಳಾಂಗಣ ಮದುವೆ ಕಾರ್ಯಕ್ರಮದಲ್ಲಿ 100 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹೊರಾಂಗಣಕ್ಕೆ 200 ಮಂದಿಗೆ ಅವಕಾಶ ನೀಡಲಾಗಿದೆ. ಇದೇ ರೀತಿಯಲ್ಲಿ ಇನ್ನಿತರ ಕಾರ್ಯಕ್ರಮಗಳಿಗೂ ನಿರ್ಬಂಧವನ್ನು ಈಗಾಗಲೇ ವಿಧಿಸಲಾಗಿದೆ. ಸದ್ಯ ಸರ್ಕಾರದ ಮುಂದೆ ಯಾವೆಲ್ಲಾ ಯೋಚನೆಗಳು ಇವೆ ಎಂಬುವುದು ಕೂಡಾ ಕುತೂಹಲ ಕೆರಳಿಸಿದೆ. ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಚಿತ್ರಮಂದಿರಗಳಿಗೆ ಲಾಕ್ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ. ಅದರ ಜೊತೆಗೆ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು ನಿಷೇಧ ಹೇರುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಬಾರ್, ರೆಸ್ಟೋರೆಂಟ್, ಪಬ್ ಲಾಕ್ ಬೀಳುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ. ಜತೆಗೆ ಜನಜಂಗುಳಿ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧ ಹೇರುವುದು ಹಾಗೂ ರಾಜ್ಯಾಧ್ಯಂತ ಸೆಕ್ಷನ್ 144 ಜಾರಿ ಸಾಧ್ಯತೆ ಕೂಡಾ ಇದೆ ಎನ್ನುತ್ತಿವೆ ಮೂಲಗಳು. ಆದರೆ ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲರ ಅಭಿಪ್ರಾಯಗಳನ್ನು ಸಂಗ್ರಹಿಸಿ ಒಂದು ನಿರ್ಧಾರವನ್ನು ಕೈಗೊಳ್ಳಬಹುದು. ಸದ್ಯ ಸಿಎಂ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಲ್ಲಿಂದಲೇ ಅವರು ವರ್ಚುವಲ್ ಮೂಲಕ ಕೋವಿಡ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸರ್ಕಾರ ಒಂದು ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.
from India & World News in Kannada | VK Polls https://ift.tt/32sQfkK