ಚಾಮರಾಜನಗರ: ಇಡೀ ದೇಶವೇ ಕರ್ನಾಟಕದತ್ತ ತಿರುಗಿ ನೋಡುವಂತಹ ಆಘಾತಕಾರಿ ಘಟನೆ ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 24 ರೋಗಿಗಳು ಸಾವನ್ನಪ್ಪಿರುವ ಆಶ್ಚರ್ಯಕಾರಿ ವಿಚಾರ ಬಹಿರಂಗಗೊಂಡಿದೆ. ಭಾನುವಾರ ಮಧ್ಯರಾತ್ರಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹನ್ನೆರಡು ಮಂದಿ ಕೊರೊನಾ ರೋಗಿಗಳು ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾದ ಪರಿಣಾಮ ಸಾವನ್ನಪ್ಪಿದ್ದರು. ಆದರೆ ಕಳೆದ ಇಪ್ಪತ್ತನಾಲ್ಕು ಗಂಟೆಯಲ್ಲಿ ಇನ್ನೂ ಹನ್ನೆರಡು ರೋಗಿಗಳು ಇತರೆ ಸಮಸ್ಯೆಯಿಂದ ಸಾವನ್ನಪ್ಪಿದ್ದು, ಆ ಮೂಲಕ ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ ಒಟ್ಟು ಇಪ್ಪತ್ತನಾಲ್ಕು ರೋಗಿಗಳು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆವರೆಗೆ 24 ಜನರು ಮೃತಪಟ್ಟಿದ್ದಾರೆ. ಆದರೆ ಮೃತಪಟ್ಟವರೆಲ್ಲರೂ ಆಮ್ಲಜನಕದ ಕೊರತೆಯಿಂದಲೇ ಮೃತಪಟ್ಟಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ. ಈ ಮಧ್ಯೆ ಸಾರ್ವಜನಿಕರು ಆಸ್ಪತ್ರೆ ಮತ್ತು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,ಇನ್ನೂ ಹೆಚ್ಚಿನ ರೋಗಿಗಳು ಸಾವನ್ನಪ್ಪಿದ್ದಾರೆ.ಆದರೆ ಜಿಲ್ಲಾಡಳಿತ ಈ ವಿಷಯವನ್ನು ಮುಚ್ಚಿಡುತ್ತಿದೆ ಎಂದು ಆರೋಪಿಸಿದ್ದಾರೆ. ತುರ್ತು ಸಚಿವ ಸಂಪುಟ ಸಭೆ ಕರೆದ ಬಿಎಸ್ವೈಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ಬಿಎಸ್ವೈ ದುರಂತ ಹಾಗೂ ಅದಕ್ಕೆ ಕಾರಣ ಕುರಿತಾಗಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲು ನಾಳೆ ತುರ್ತು ಸಚಿವ ಸಂಪುಟ ಸಭೆಯನ್ನು ಸಿಎಂ ಕರೆದಿದ್ದಾರೆ.
from India & World News in Kannada | VK Polls https://ift.tt/3nJjKIw