: ಮಹಾರಾಷ್ಟ್ರ ಮತ್ತು ಬೆಳಗಾವಿ ಭಾಗದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಕಳೆದ ರಾತ್ರಿ ಕೂಡ ಸುರಿದ ಮಳೆಯಿಂದಾಗಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಹಲವೆಡೆ ಸೇತುವೆಗಳು ಜಲಾವೃತಗೊಂಡಿದ್ದು, ಜನಜೀವನ ಸಂಚಾರ ಬಂದ್ ಆಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಪ್ರವಾಹ ಭೀತಿ ಹೆಚ್ಚಾಗಿದ್ದು, ಮುಧೋಳ ತಾಲೂಕಿನ 5 ಸೇತುವೆಗಳು ಜಲಾವೃತಗೊಂಡಿವೆ. ಮಿರ್ಜಿ-ಅಕ್ಕಿಮರಡಿ, ಮಹಾಲಿಂಗಪೂರ-ಯಾದವಾಡ್, ನಂದಗಾವ್-ಮಹಾಲಿಂಗಪೂರ, ಒಂಟಗೊಡಿ - ಸೋರಗಾಂವ, ಢವಳೇಶ್ವರ -ಮಹಾಲಿಂಗಪೂರ ಸೇತುವೆಗಳು ಮುಳುಗಡೆಯಾಗಿವೆ. ಕ್ಷಣ ಕ್ಷಣಕ್ಕೂ ಪ್ರವಾಹ ಭೀತಿ ಹೆಚ್ಚಾಗುತ್ತಿದ್ದು, ಈಗಾಗಲೇ 9 ಗ್ರಾಮಗಳ ಸಂಪರ್ಕ ಕಡಿತಗೊಂಡು ಜನರು ಆತಂಕಕ್ಕೀಡಾಗಿದ್ದಾರೆ. ಗ್ರಾಮಗಳ ಸಂಪರ್ಕ ಕಡಿತಗೊಂಡ ಹಿನ್ನೆಲೆ ಗ್ರಾಮಸ್ಥರು ಸುತ್ತುವರಿದು ಸಂಚಾರ ಆರಂಭಿಸಿದ್ದಾರೆ. ಮಿರ್ಜಿ, ಮಲ್ಲಾಪೂರ, ಒಂಟಗೋಡಿ, ಚನಾಳ, ನಾಗರಾಳ, ಅಕ್ಕಿಮರಡಿ, ನಂದಗಾಂವ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಜಲಾಶಯದ ನೀರು ಹೊರಕ್ಕೆ; ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷ 17 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಇದರಿಂದಾಗಿ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಇನ್ನೊಂದೆಡೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹಿಪ್ಪರಗಿ ಜಲಾಶಯದಿಂದ 2 ಲಕ್ಷ 17 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ. ಇದರಿಂದಾಗಿ ಚಿಕ್ಕಪಡಸಲಗಿ ಸೇತುವೆ ಬಳಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ.
from India & World News in Kannada | VK Polls https://ift.tt/3l4mdyj