ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು ರಾಜ್ಯ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ ಎಂದು ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಸದಾ ಜಪಿಸುವ 'ಯುಪಿ ಮಾಡೆಲ್'ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿ ತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ವಿರುದ್ಧನೂ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಸುಮಾರು 7.30ಕ್ಕೆ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಐದು ಮಂದಿ ನಡೆಸಿದ್ದಾರೆ. ಆಕೆಯ ಸ್ನೇಹಿತನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ಅತ್ಯಾಚಾರ ದೂರು ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಇನ್ನು ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ವಿಚಾರವಾಗಿ ದೆಹಲಿಯಲ್ಲಿ ಈಗಾಗಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಅತ್ಯಾಚಾರಕ್ಕೆ ಒಳಗಾಗಿರುವ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಲಾಗಿದೆ. ಅದರ ಆಧಾರದ ಮೇಲೆ ದೂರು ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಕಠಿಣ ಕ್ರಮ ಕೈಗೊಳ್ಳಲು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
from India & World News in Kannada | VK Polls https://ift.tt/3BrZtgD