ಬೆಂಗಳೂರು: ಕಾರ್ಮಿಕ ಉದ್ಯೋಗಕ್ಕೆ ತೆರಳುವ ವೇಳೆ ಅವಘಡಗಳು ಸಂಭವಿಸಿ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದು ಪರಿಗಣಿಸಬೇಕು ಮತ್ತು ಮೃತನ ವಾರಸುದಾರರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕಾಫಿ ಎಸ್ಟೇಟ್ಗೆ ತೆರಳುತ್ತಿದ್ದಾಗ ಕಾಲು ಜಾರಿ ಬಿದ್ದು ಸಾವಿಗೀಡಾಗಿದ್ದ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಲು ಚಿಕ್ಕಮಗಳೂರಿನ ಕಾರ್ಮಿಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಸ್ಟೇಟ್ ಮಾಲೀಕ ಎನ್.ಎಲ್. ಪುಣ್ಯಮೂರ್ತಿ ಹಾಗೂ ನ್ಯಾಷನಲ್ ವಿಮಾ ಕಂಪನಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯಪೀಠ, ‘ಕೆಲಸಕ್ಕೆ ಆಗಮಿಸುವ ಮತ್ತು ಕೆಲಸ ಮುಗಿಸಿ ನಿರ್ಗಮಿಸುವ ಸಮಯವನ್ನು ಉದ್ಯೋಗದ ಅವಧಿಯೆಂದೇ ಪರಿಗಣಿಸಬೇಕಾಗುತ್ತದೆ. ವಾಸ್ತವದಲ್ಲಿ ಉದ್ಯೋಗಕ್ಕೆ ಹಾಜರಾಗಲೆಂದೇ ಸ್ವಾಮಿಗೌಡ ಮನೆ ಬಿಟ್ಟು ತೆರಳಿದ್ದಾನೆ. ಉದ್ಯೋಗದ ಜಾಗಕ್ಕೆ ತೆರಳುವಾಗ, ಅದೂ ಮಾಲೀಕನಿಗೆ ಸೇರಿದ ಜಾಗದಲ್ಲಿ ಕಾಲು ಜಾರಿ ಬಿದ್ದು ಸಾವು ಸಂಭವಿಸಿದೆ. ಹಾಗಾಗಿ, ಮಾಲೀಕರು ಮತ್ತು ವಿಮಾ ಕಂಪನಿಯೇ ಪರಿಹಾರ ಪಾವತಿಸಬೇಕು’ ಎಂದು ನ್ಯಾಯಪೀಠ ಆದೇಶಿಸಿದೆ. ಪರಿಹಾರ ಪಡೆಯಲು ಮೃತನ ವಾರಸುದಾರರು ಕಾನೂನು ರೀತಿಯಲ್ಲಿ ಅರ್ಹರಾಗಿದ್ದಾರೆ. ಆ ಸಂಬಂಧ ಕಾರ್ಮಿಕ ಆಯುಕ್ತರು ಹೊರಡಿಸಿರುವ ಆದೇಶ ನ್ಯಾಯ ಸಮ್ಮತವಾಗಿದೆ. ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಕಾರ್ಮಿಕ ಆಯುಕ್ತರ ಆದೇಶ ಎತ್ತಿಹಿಡಿದಿದೆ. ಪ್ರಕರಣದಲ್ಲಿ ಮೃತಪಟ್ಟಿರುವ ಸ್ವಾಮಿಗೌಡ ಅವರದು ಉದ್ಯೋಗ ಅವಧಿಯಲ್ಲಿ ಸಂಭವಿಸಿದ ಸಾವು ಅಲ್ಲ ಎಂಬ ವಿಮಾ ಕಂಪನಿ ಮತ್ತು ಎಸ್ಟೇಟ್ ಮಾಲೀಕನ ವಾದ ಒಪ್ಪಲಾಗದು. ಈ ಪ್ರಕರಣದಲ್ಲಿ ಬೆಳಗ್ಗೆ 8ರಿಂದ ಉದ್ಯೋಗದ ಅವಧಿ ಆರಂಭವಾಗುತ್ತದೆ. ಆತನ ಸಾವು ಬೆಳಗ್ಗೆ 7 ಗಂಟೆಗೆ ಸಂಭವಿಸಿದೆ. ಸಾವು ಕೂಡ ಆತನ ಮನೆಯಲ್ಲಿ ನಡೆದಿಲ್ಲ. ಒಂದು ವೇಳೆ ಮನೆಯಲ್ಲಿ ಸಾವು ಸಂಭವಿಸಿದ್ದರೆ ಎಸ್ಟೇಟ್ ಮಾಲೀಕನ ಮತ್ತು ವಿಮಾ ಕಂಪನಿಯ ವಾದ ಒಪ್ಪಬಹುದಾಗಿತ್ತು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ಹಿನ್ನೆಲೆ:ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸ್ವಾಮಿಗೌಡ, 2006ರ ಜ.12ರಂದು ಕೊಳ್ಳಿಬೈಲಿನ ಪುಣ್ಯಮೂರ್ತಿಯ ಕಾಫಿ ಎಸ್ಟೇಟ್ಗೆ ಕೂಲಿಗೆ ಹೋಗುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು. ಕುಟುಂಬ ಕಾರ್ಮಿಕ ಆಯುಕ್ತರ ಮುಂದೆ ಕ್ಲೇಮು ಅರ್ಜಿ ಸಲ್ಲಿಸಿತ್ತು. ಮೃತನ ಕುಟುಂಬಕ್ಕೆ 1,76,328 ರೂ. ಪರಿಹಾರ ಘೋಷಣೆ ಮಾಡಿದ ಆಯುಕ್ತರು, ಆ ಮೊತ್ತಕ್ಕೆ 2006ರ ಆ.13ರಿಂದ ವಾರ್ಷಿಕ ಶೇ.7.5ರಷ್ಟು ಬಡ್ಡಿ ದರ ಪಾವತಿಸಬೇಕು. ಈ ಹಣದಲ್ಲಿ 75,032 ರೂ. ಎಸ್ಟೇಟ್ ಮಾಲೀಕರು ಮತ್ತು ಉಳಿದ 1,01,296 ರೂ.ಗಳನ್ನು ವಿಮಾ ಕಂಪನಿ ಪಾವತಿಸಬೇಕು ಎಂದು ಆದೇಶಿಸಿದ್ದರು. ವಿಮಾ ಕಂಪನಿ ಪರ ವಕೀಲರು, ಘಟನೆಯು ಉದ್ಯೋಗದ ಅವಧಿಯಲ್ಲಿ ನಡೆದ ಅಪಘಾತವಲ್ಲ. ಘಟನೆ ನಡೆದ ದಿನದಂದು ಮುಂಜಾನೆ ಮಳೆ ಬಂದಿತ್ತು. ಕೆಸರಿನ ಮೇಲೆ ಕಾಲಿಟ್ಟಾಗ ಜಾರಿದ ಪರಿಣಾಮ ಸ್ವಾಮಿಗೌಡಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಘಟನೆಗೂ ಮತ್ತು ಆತನ ಉದ್ಯೋಗಕ್ಕೆ ಯಾವುದೇ ಸಂಬಂಧ ಇಲ್ಲ. ಸಾವನ್ನಪ್ಪಿದ ವೇಳೆ ಉದ್ಯೋಗ ಮಾಡುತ್ತಿರಲಿಲ್ಲ ಎಂದು ವಾದಿಸಿದ್ದರು.
from India & World News in Kannada | VK Polls https://ift.tt/3j6GyRO