ಲಖನೌ: ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಉತ್ತರಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಭಾನುವಾರ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ, ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರದ್ವಜದ ಮೇಲೆ ಹಾಕಿದ್ದು, ವಿವಾದ ಸೃಷ್ಟಿಗೆ ಕಾರಣವಾಗಿದೆ. ಲಖನೌದಲ್ಲಿನ ಕಲ್ಯಾಣ್ ಸಿಂಗ್ ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಕಾರಿ ಗೌರವದೊಂದಿಗೆ ನಮನ ಸಲ್ಲಿಸಿದರು. ನಂತರ ಮನೆಯಿಂದ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ಒಯ್ದು ಗೌರವ ಸಲ್ಲಿಸಲಾಯಿತು. ಪಕ್ಷದ ಅಧ್ಯಕ್ಷ ನಡ್ಡಾ ಅವರು ಅಂತಿಮ ನಮನ ಸಲ್ಲಿಸಲು ಆಗಮಿಸುವ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ ಹಾಕಲಾಯಿತು. ಬಿಜೆಪಿಯ ಈ ನಡೆ ವಿವಾದಕ್ಕೆ ಕಾರಣವಾಗಿದ್ದು, ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ‘ಬಿಜೆಪಿ ಪಾಲಿಗೆ ದೇಶಕ್ಕಿಂತ ಪಕ್ಷವೇ ಮುಖ್ಯ. ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಅವರು ಒಪ್ಪಿಕೊಳ್ಳುವುದಿಲ್ಲ. ಇದೊಂದು ತಲೆ ತಗ್ಗಿಸುವ ಘಟನೆ’ ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮುಖಂಡರು ಟೀಕಿಸಿದ್ದಾರೆ.
from India & World News in Kannada | VK Polls https://ift.tt/3B46e88