ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ದಕ್ಷಿಣ ಕರ್ನಾಟಕ ಮಾತ್ರವಲ್ಲದೆ, ದಕ್ಷಿಣ ಭಾರತದಲ್ಲಿ ಪ್ರಮುಖ ಯಾತ್ರಾ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಲೈ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಲೈ ಮಹದೇಶ್ವರ ದಕ್ಷಿಣ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ. ಮೈಸೂರಿನಿಂದ ಬೆಂಗಳೂರಿನವರೆಗೆ ಪ್ರತಿಯೊಬ್ಬರೂ ನಡೆದುಕೊಳ್ಳುವ ಧಾರ್ಮಿಕ ಕ್ಷೇತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಇದರ ಅಭಿವೃದ್ಧಿಗೆ ಚಿಂತನೆ ನಡೆದು ವೇಗವನ್ನೂ ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪ ಅವರು. ಪ್ರಾಧಿಕಾರ ರಚಿಸಿದ್ದಲ್ಲದೆ ದೊಡ್ಡ ಪ್ರಮಾಣದಲ್ಲಿ ಅನುದಾನವನ್ನೂ ಅವರು ಒದಗಿಸಿದ್ದಾರೆ ಎಂದರು. ಸಾವಿರಾರು ಭಕ್ತರು ಬರುವ ಕ್ಷೇತ್ರಕ್ಕೆ ಸೌಲಭ್ಯಗಳ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಸರಿಯಾದ ಮಾರ್ಗರ್ಶನವೂ ಅಗತ್ಯ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಶೀಘ್ರದಲ್ಲಿಯೇ ಕ್ಷೇತ್ರಕ್ಕೆ ಭೇಟಿ ನೀಡಿ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಭರವಸೆಯಿತ್ತರು. ಮಾದೇಶ್ವರ ಬೆಟ್ಟದ ಸಂಪೂರ್ಣ ಚಿತ್ರಣವನ್ನು ನೀಡುವ ಉಘೆ ಮಾದಪ್ಪ ಎನ್ನುವ ಪುರವಣಿಯನ್ನು ವಿಜಯ ಕರ್ನಾಟಕ ಹೊರತಂದಿದೆ. ಪತ್ರಿಕೆ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತರುವುದಲ್ಲದೆ, ಸಾಮಾಜಿಕ ಹಾಗೂ ಧಾರ್ಮಿಕ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತಿದೆ. ಪ್ರವಾಸೋದ್ಯಮದ ದೃಷ್ಡಿಯಿಂದಲೂ ಪತ್ರಿಕೆಯ ಕೆಲಸ ಸಹಕಾರಿಯಾಗಿದೆ. ಈ ಮೂಲಕ ಸ್ಥಳೀಯರಿಗೆ ಉದ್ಯೋಗ ದೊರಕುವಂತಾಗಲಿ ಎಂದು ಆಶಿಸಿದರು. ಸಭೆಯಲ್ಲಿ ಸಚಿವರಾದ ಸುನೀಲ್ ಕುಮಾರ, ಶಶಿಕಲಾ ಜೊಲ್ಲೆ, ಎಸ್.ಟಿ.ಸೋಮಶೇಖರ್, ಶಾಸಕ ಎನ್.ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.
from India & World News in Kannada | VK Polls https://ift.tt/2XN6SZq