ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ದರ ಏರಿಕೆ, ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ನಿರ್ವಹಣೆ, ಕೋವಿಡ್ ೧೯ ಸಂಕಷ್ಟದ ನಿರ್ವಹಣಯಲ್ಲಿ ಸರ್ಕಾರದ ವೈಫಲ್ಯ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಕಟ್ಟಿಹಾಕಲು ತಂತ್ರ ರೂಪಿಸುತ್ತಿದೆ. ಸೆಪ್ಟಂಬರ್ ೧೩ ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದೆ. ಅಧಿವೇಶನದಲ್ಲಿ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಈಗಾಗಲೇ ಸಜ್ಜುಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಸೆಪ್ಟಂಬರ್ ೭ ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಸಿದ್ದರಾಮಯ್ಯ ಅವರು ಕರೆದಿದ್ದಾರೆ. ಕಾಂಗ್ರೆಸ್ ಬತ್ತಳಿಕೆಯಲ್ಲಿರುವ ಅಸ್ತ್ರಗಳು ಇವು ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಅಷ್ಟೇ ಅಲ್ಲದೆ ಅಡುಗೆ ಅನಿಲ ದರ ಕೂಡಾ ಗಗನಕ್ಕೇರಿದೆ. ಮಿತಿ ಮೀರಿ ದರ ಏರಿಕೆ ಆಗುತ್ತಿದ್ದರೂ ಸರ್ಕಾರ ದರ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ವಿಚಾರವನ್ನೇ ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಲು ಕಾಂಗ್ರೆಸ್ ಮುಂದಾಗಿದೆ. ಅಂಕಿ ಅಂಶಗಳ ಜೊತೆ ರಾಜ್ಯ ಸರ್ಕಾರವನ್ನು ಕಟ್ಟುಹಾಕಲು ಕಾಂಗ್ರೆಸ್ ನಿರ್ಧರಿಸಿದೆ. ಈಗಾಗಲೇ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆಗಳನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಯುವ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿದೆ. ಇನ್ನು ಅಧಿವೇಶನದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಗದ್ದಲಕ್ಕೆ ಕಾರಣವಾಗಲಿದೆ. ಅದೇ ರೀತಿಯ ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ನಿಲುವಳಿ ಸೂಚನೆ ಮಂಡಿಸುವ ಮೂಲಕ ಈ ವಿಚಾರವನ್ನು ಪ್ರಸ್ತಾಪಿಸಿ ಸದನದಲ್ಲಿ ಚರ್ಚೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಮೈಸೂರು ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಅತ್ಯಾಚಾರ ಪ್ರಕರಣವನ್ನು ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ಮುಂದಾಗಿದೆ. ಇದರ ಜೊತೆಗೆ ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಅಭಿವೃದ್ದಿ ಕಾರ್ಯಗಳಲ್ಲಿ ಹಿನ್ನಡೆ, ಕೇಂದ್ರದಿಂದ ಅನುದಾನ ಕೊರತೆ, ಜಿಎಸ್ಟಿ ಪರಿಹಾರ ವಿಳಂಬ ಹಾಗೂ ನೀರಾವರಿ ಯೋಜನೆಗಳ ಜಾರಿ ವಿಚಾರವಾಗಿಯೂ ಸದನದಲ್ಲಿ ಕಾಂಗ್ರೆಸ್ ಪ್ರಸ್ತಾಪ ಎತ್ತಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಲು ತಯಾರಿ ನಡೆಸುತ್ತಿದೆ. ಇನ್ನು ಜೆಡಿಎಸ್ ಪಕ್ಷ ಕೂಡಾ ಇಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ನಿರ್ಧಾರ ಮಾಡಿದೆ. ಅದರಲ್ಲೂ ನೀರಾವರಿ ಯೋಜನೆಗಳ ಜಾರಿ ವಿಳಂಬ ಹಾಗೂ ರಾಜ್ಯ ಸರ್ಕಾರದ ನಿಲುವುಗಳ ಕುರಿತಾಗಿ ಸದನದಲ್ಲಿ ಪ್ರಸ್ತಾಪ ನಡೆಸುವ ಸಾಧ್ಯತೆ ಇದೆ. ಈ ನಡುವೆ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಹೋರಾಟವನ್ನು ಹಮ್ಮಿಕೊಳ್ಳಲು ಜೆಡಿಎಸ್ ನಿರ್ಧಾರ ಮಾಡಿದೆ. ಒಟ್ಟಿನಲ್ಲಿ ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಜೆಡಿಎಸ್ ಸಜ್ಜಾಗುತ್ತಿವೆ.
from India & World News in Kannada | VK Polls https://ift.tt/3kTrlTW