ಬೆಂಗಳೂರು: ವಿರೋಧ ಪಕ್ಷದ ನಾಯಕ ಮಂಗಳವಾರ ದೆಹಲಿಯತ್ತ ತೆರಳಿದ್ದಾರೆ. ಎಐಸಿಸಿ ಅಧ್ಯಕ್ಷೆ ಬುಲಾವಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿಮಾನ ಏರಿದ್ದಾರೆ. ಸದ್ಯ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭೇಟಿ ಮಹತ್ವ ಪಡೆದುಕೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ತಂತ್ರಗಾರಿಕೆ ಬದಲಾವಣೆ ಮಾಡುವ ನಿಟ್ಟಿನಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಇತ್ತೀಚೆಗಷ್ಟೇ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ದಲಿತ ಮುಖಂಡ ಜಿಗ್ನೇಶ್ ಮೆವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಬಿಜೆಪಿಗೆ ಸೈದ್ದಾಂತಿಕವಾಗಿ ಟಕ್ಕರ್ ನೀಡಲು ಕಾಂಗ್ರೆಸ್ ಸಿದ್ದತೆ ನಡೆಸುತ್ತಿದೆ. ಪಕ್ಷದ ಜಿ 23 ಭಿನ್ನಮತದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸೈದ್ದಾಂತಿಕ ತಳಹದಿಯ ತಂಡದ ರಚನೆಗೆ ಪ್ರಯತ್ನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪ್ರಮುಖರ ಜೊತೆ ಸ್ವತಃ ಸೋನಿಯಾ ಗಾಂಧಿ ಮಾತುಕತೆ ನಡೆಸಲು ನಿರ್ಧಾರ ಮಾಡಿದ್ದಾರೆ. ಅದರ ಭಾಗವಾಗಿಯೇ ಸಿದ್ದರಾಮಯ್ಯ ಅವರಿಗೆ ಬುಲಾವು ಬಂದಿದೆ. ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ನಡೆಯುತ್ತಿರುವ ಸಿದ್ದತೆಗಳಿಗೆ ಸಿದ್ದರಾಮಯ್ಯ ಅವರ ಸಲಹೆಗಳನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಇನ್ನೇನು ಒಂದುವರೆ ವರ್ಷದಲ್ಲಿ ಚುನಾವಣೆ ಎದುರಾಗಲಿದ್ದು ರಾಷ್ಟ್ರೀಯ ನಾಯಕರು ಕರ್ನಾಟಕದ ಬಗ್ಗೆ ಭರವಸೆ ಇಟ್ಟುಕೊಂಡಿದ್ದಾರೆ. ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಜ್ಯದಲ್ಲಿ ಇರುವ ಪೂರಕ ವಾತಾವರಣವನ್ನು ಬಳಸಿಕೊಳ್ಳುವ ಮೂಲಕ ಪಕ್ಷವನ್ನು ಮತ್ತೆ ಅಧಿಕಾರ ಸಲಹೆ ಸೂಚನೆಗಳನ್ನು ಸೋನಿಯಾ ಗಾಂಧಿ ನೀಡುವ ಸಾಧ್ಯತೆ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ.
from India & World News in Kannada | VK Polls https://ift.tt/3a9exUs