ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿ ಗಾಳಿಯಿಂದ ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಗುರುವಾರ ಭರ್ಜರಿ ಮಳೆ ಸುರಿದು, ಹಬ್ಬದ ಆಚರಣೆ ಉತ್ಸಾಹಕ್ಕೆ ತಣ್ಣೀರೆರಚಿದೆ. ಬೆಂಗಳೂರಿನಲ್ಲಿ ಗುರುವಾರ ಬೆಳಗಿನಿಂದಲೇ ದಟ್ಟ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಎರಡೂವರೆ ತಾಸು ನಿರಂತರ ಮಳೆಯಾದ್ದರಿಂದ ನಗರದ ರಸ್ತೆಗಳಲ್ಲಿ ನೀರು ನಿಂತು ವಾಹನ ಹಾಗೂ ಜನರ ಸಂಚಾರಕ್ಕೆ ತೊಂದರೆಯಾಯಿತು. ಇದರ ಜತೆಗೆ ಮನೆ ಮಂದಿಯೆಲ್ಲಾ ಸೇರಿ ದೀಪಾವಳಿ ಪಟಾಕಿ ಸಿಡಿಸಿ ಸಂಭ್ರಮಿಸುವುದಕ್ಕೂ ವರುಣ ಅವಕೃಪೆ ತೋರಿದ. ಹಬ್ಬದ ರಜೆ ಇದ್ದ ಕಾರಣ ವಾಹನ ಸಂಚಾರವೇನೋ ತುಸು ಕಡಿಮೆ ಇತ್ತು. ಆದರೆ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನಗಳು ಮಂದಗತಿಯಲ್ಲಿ ಸಾಗಿ, ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಯಿತು. ನೀರು ತುಂಬಿಕೊಂಡ ರಸ್ತೆಗಳಲ್ಲಿ ಸಂಚರಿಸಲು ದ್ವಿಚಕ್ರ ವಾಹನ ಸವಾರರು ಸರ್ಕಸ್ ಮಾಡಬೇಕಾಯಿತು. ಪಾದರಾಯನಪುರ ಸೇರಿ ತಗ್ಗು ಪ್ರದೇಶಗಳು ಜಲಾವೃತನಗರದಲ್ಲಿ ಗುರುವಾರ ರಾತ್ರಿ ಅಬ್ಬರಿಸಿದ ಮಳೆಗೆ ಜಗಜೀವನ್ರಾಂ ನಗರ, ಪಾದರಾಯನಪುರ, ಬಾಪೂಜಿ ನಗರದ ಹಲವು ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದವು. ರಾಜಕಾಲುವೆ ಉಕ್ಕಿ ಹರಿದು ಸಮೀಪದ ಅನೇಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಮನೆಯಲ್ಲಿದ್ದ ಪಾತ್ರೆ, ಬಟ್ಟೆಗಳು ಕೊಳಚೆ ನೀರಿನಲ್ಲಿ ತೇಲಿದವು. ಅಕ್ಕಿ, ಬೇಳೆ, ಇತರೆ ದಿನಸಿ ಪದಾರ್ಥಗಳೆಲ್ಲವೂ ಹಾಳಾದವು. ರಸ್ತೆಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳೆಲ್ಲವೂ ಮುಳುಗಿ ಹೋಗಿದ್ದವು. ಕೆಲ ವಾಹನಗಳು ನೀರಿನಲ್ಲಿ ತೇಲಿದವು. ಬಡವರು, ಮಧ್ಯಮ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಈ ಪ್ರದೇಶಗಳಲ್ಲಿ ಮಳೆ ಬಂದಾಗಲೆಲ್ಲಾ ಸಮಸ್ಯೆ ತಪ್ಪಿದ್ದಲ್ಲ. ಮತ್ತೆ ವರುಣಾರ್ಭಟ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿನ. 5ರಂದು ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ನ.6 ರಿಂದ ನ.8ರವೆಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಿಡಿಲಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಗದಗ, ಹಾವೇರಿ, ಬೆಳಗಾವಿ, ಬಳ್ಳಾರಿ, ಧಾರವಾಡ, ವಿಜಯನಗರ ಜಿಲ್ಲೆಗಳ ಕೆಲವು ಕಡೆ ಮುಂದಿನ ಮೂರು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನ ಅಬ್ಬರ ಇರಲಿದೆ. ಗುರುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಹಾಸನದಲ್ಲಿ7 ಸೆಂ.ಮೀ. ಮಳೆಯಾಗಿದೆ. ಇದು ನ.4ರಂದು ರಾಜ್ಯದಲ್ಲಿ ದಾಖಲಾದ ಅತಿಹೆಚ್ಚು ಮಳೆ.
from India & World News in Kannada | VK Polls https://ift.tt/3BOtUxh