ಹೊಸದಿಲ್ಲಿ: ಇಂದು ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 65ನೇ ಪುಣ್ಯತಿಥಿ. ಬಾಬಾ ಸಾಹೇಬರು ದೇಹತ್ಯಾಗ ಮಾಡಿದ ದಿನವನ್ನು ‘’ವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಗಣ್ಯರು ಗೌರವ ಸಲ್ಲಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ , ರಾಜ್ಯ ಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇನ್ನಿತರ ಗಣ್ಯರು ಹೊಸದಿಲ್ಲಿಯ ಸಂಸತ್ ಆವರಣದಲ್ಲಿರುವ ಡಾ ಭೀಮ್ ರಾವ್ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನ ಶಿಲ್ಪಿಯನ್ನು ನೆನೆದರು. ಭಾರತರತ್ನ ಡಾ.ಭೀಮ್ ರಾವ್ ಅಂಬೇಡ್ಕರ್ ಅವರು ಭಾರತದ ಸಂವಿಧಾನಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ, ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ. ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ಇಂದು ದೇಶಾದ್ಯಂತ ಕೋಟ್ಯಂತರ ಮಂದಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಅಂಬೇಡ್ಕರ್ ಅವರು ಇಲ್ಲದೇ ಇರುತ್ತಿದ್ದರೆ ದೇಶದಲ್ಲಿ ಇಂದಿಗೂ ಸಹಸ್ರಾರು ಮಂದಿ ನಿತ್ಯ ನರಕವನ್ನು ಅನುಭವಿಸುತ್ತಿದ್ದರು ಅನ್ನೋದು ವಾಸ್ತವ ಸತ್ಯ. 1891ರ ಏಪ್ರಿಲ್ 14ರಂದು ಜನಿಸಿದ ಬಾಬಾ ಸಾಹೇಬರು ಅಸಮಾನತೆಯೇ ಮೇಳೈಸುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದು ಅನ್ನುವ ದೃಷ್ಟಿಯಿಂದ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡನೆ ಮಾಡಿದವರು. ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಟ ಸಂವಿಧಾನವನ್ನು ನೀಡಿದರು. ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಬಾಬಾ ಸಾಹೇಬರು ಡಿಸೆಂಬರ್ 6, 1956ರಂದು ದೇಹತ್ಯಾಗ ಮಾಡಿದರು.
from India & World News in Kannada | VK Polls https://ift.tt/3opCX3Z