ಬೆಂಗಳೂರು: ವಿಧಾನಪರಿಷತ್ ಚುನಾವಣೆಯ ಹೊಸ್ತಿಲಲ್ಲೇ ಜೆಡಿಎಸ್ಗೆ ಆಪರೇಷನ್ ಹಸ್ತದ ಮೂಲಕ ಶಾಕ್ ಮೇಲೆ ಶಾಕ್ ನೀಡುತ್ತಿದೆ. ದಿನಗಳ ಹಿಂದೆಯಷ್ಟೇ ವಿಧಾನಪರಿಷತ್ ಮಾಜಿ ಜೆಡಿಎಸ್ ಸದಸ್ಯ ಸಿ. ಆರ್ ಮನೋಹರ್ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಅವರ ಜೊತೆಗೆ ಕೆಲವೊಂದು ಸ್ಥಳೀಯ ಮುಖಂಡರೂ ‘ಕೈ’ ಹಿಡಿದಿದ್ದಾರೆ. ಈ ನಡುವೆ ಉತ್ತರ ಕರ್ನಾಟಕ ಭಾಗದ ಪ್ರಮುಖ ನಾಯಕ ಎನ್.ಎಚ್ ಕೋನರೆಡ್ಡಿ ತೆನೆ ಇಳಿಸಲಿದ್ದಾರೆ ಎನ್ನಲಾಗುತ್ತಿದೆ. ಗುಬ್ಬಿ ಶಾಸಕ ಶ್ರೀನಿವಾಸ್, ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆಯುವ ಮಾತನ್ನಾಡಿದ್ದಾರೆ. ಇಬ್ಬರಿಬ್ಬರಿಗೂ ಸಿದ್ದರಾಮಯ್ಯ ಅವರು ಬಹಿರಂಗವಾಗಿಯೇ ಪಕ್ಷ ಸೇರಲು ಆಹ್ವಾನ ನೀಡಿದ್ದಾರೆ. ಅಷ್ಟೇ ಅಲ್ಲ, ಈ ಇಬ್ಬರು ನಾಯಕರೂ ಜೆಡಿಎಸ್ ಪಕ್ಷದಿಂದ ಒಂದು ಕಾಲು ಹೊರಗಡೆ ಈಗಾಗಲೇ ಇಟ್ಟಿರುವುದಾಗಿಯೂ ಹೇಳಿಕೊಂಡಿದ್ದಾರೆ. ಸಹಜವಾಗಿ ಈ ಎಲ್ಲಾ ಬೆಳವಣಿಗೆಗಳು ದಳಪತಿಗಳಲ್ಲಿ ಟೆನ್ಷನ್ ಹುಟ್ಟುಹಾಕಿದೆ. ಇನ್ನೇನು ವಿಧಾನಸಭಾ ಚುನಾವಣೆಗೆ ಒಂದು ವರ್ಷಗಳು ಬಾಕಿ ಉಳಿದಿದ್ದು ಇಂತಹ ಸಂದರ್ಭದಲ್ಲಿ ಆಪರೇಷನ್ ಪರ್ವ ಪಕ್ಷಕ್ಕೆ ಒಳ ಏಟು ನೀಡಲಿದೆ. ಕಮಲದೊಂದಿಗೆ ಮೈತ್ರಿ ಮೂಲಕ ಆಪರೇಷನ್ಗೆ ಟಕ್ಕರ್ ! ತಮ್ಮ ಪಕ್ಷದ ಮುಖಂಡರನ್ನು ಸೆಳೆಯುತ್ತಿರುವ ಕಾಂಗ್ರೆಸ್ಗೆ ಟಕ್ಕರ್ ನೀಡಲು ದಳಪತಿಗಳು ತಂತ್ರ ಹೂಡುತ್ತಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಕೆಲವು ಕಡೆಗಳಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡುವ ನಿಟ್ಟಿನಲ್ಲಿ ಆಂತರಿಕವಾಗಿ ಮಾತುಕತೆಗಳು ನಡೆಯುತ್ತಿವೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಜೊತೆಗೆ ಮಾತುಕತೆ ನಡೆಸಿದ್ದಾರೆ. “ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಹೊರಗೆ ಮುಕ್ತವಾಗಿಯೇ ಮಾತನಾಡಿದ್ದಾರೆ. ಅಲ್ಲದೆ, ಸ್ವತಃ ಅವರು ನನಗೆ ಮೊಬೈಲ್ ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಲ್ಲವೋ ಅಂಥ ಕ್ಷೇತ್ರಗಳಲ್ಲಿ ಜೆಡಿಎಸ್ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ” ಎಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಆದರೆ ಈ ಬಗ್ಗೆ ಮಂಗಳವಾರ ಅಧಿಕೃತವಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಮೂಲಕ ಆಪರೇಷನ್ ಹಸ್ತಕ್ಕೆ ತಿರುಗೇಟು ನೀಡುವುದು ದಳಪತಿಗಳ ತಂತ್ರವಾಗಿದೆ. ಆದರೆ ಕಳೆದ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ಸಂದರ್ಭದಲ್ಲಿ ಆರ್ಎಸ್ಎಸ್ ವಿರುದ್ಧ ಎಚ್ಡಿಕೆ ತೀವ್ರ ವಾಗ್ದಾಳಿ ನಡೆಸಿದ್ದರು. ಇದು ಬಿಜೆಪಿ ಮುಖಂಡರ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಆದರೆ ಇದೀಗ ಮತ್ತೆ ಮೈತ್ರಿಯ ಮಾತುಕತೆಗಳು ಕುತೂಹಲ ಕೆರಳಿಸಿವೆ. ಈ ನಡುವೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಆಪರೇಷನ್ ಹಸ್ತದಿಂದ ಪಕ್ಷದ ಪ್ರಮುಖರನ್ನು ಉಳಿಸಿಕೊಳ್ಳುವುದು ಒಂದು ಕಡೆಯಾದರೆ ಬಿಜೆಪಿ ಜೊತೆಗೆ ಮೈತ್ರಿ ಇಂದಾಗುವ ಪರಿಣಾಮವನ್ನು ಅವಲೋಕಿಸಿ ಹೆಜ್ಜೆ ಇಡುವುದು ಜೆಡಿಎಸ್ ಪಾಲಿಗೆ ಸವಾಲಿನ ಸಂಗತಿಯಾಗಿದೆ. ಇದನ್ನು ದಳಪತಿಗಳು ಹೇಗೆ ನಿಭಾಯಿಸುತ್ತಾರೆ ಎಂಬುವುದು ಸದ್ಯದ ಕುತೂಹಲ.
from India & World News in Kannada | VK Polls https://ift.tt/3pxn3UC