ವಿಕ ವೆಬ್ ವರದಿ ಫಲಶ್ರುತಿ: ಸೇತುವೆಯಿಲ್ಲದ ಹೊಸಾಕುಳಿ ಗ್ರಾಮಕ್ಕೆ ಶಾಸಕರ ಭೇಟಿ, ಸೇತುವೆ ನಿರ್ಮಾಣದ ಭರವಸೆ!

ಕಾರವಾರ: ಸೇತುವೆಯಿಲ್ಲದ ಹೊನ್ನಾವರ ತಾಲ್ಲೂಕಿನ ಹೊಸಾಕುಳಿ ಗ್ರಾಮಕ್ಕೆ ದಿನಕರ್ ಶೆಟ್ಟಿ ಭೇಟಿ ನೀಡಿ, ನಿರ್ಮಾಣದ ಭರವಸೆ ನೀಡಿದ್ದಾರೆ. ಹೊನ್ನಾವರ ತಾಲ್ಲೂಕಿನ ಹೊಸಾಕುಳಿ ಗ್ರಾಮಸ್ಥರು ಸೇತುವೆ ಇಲ್ಲದ ಕಾರಣ ಜೀವ ಕೈಯಲ್ಲಿ ಹಿಡಿದು ನದಿ ದಾಟುತ್ತಿದ್ದರು. ಗರ್ಭಿಣಿಯರು, ರೋಗಿಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಗ್ರಾಮಸ್ಥರು ಗ್ರಾಮದಿಂದ ಹೊರಹೋಗಲು ನಿತ್ಯ ನದಿಯಲ್ಲಿ ನಡೆದುಕೊಂಡು ತೆರಳಬೇಕಾಗಿತ್ತು. ಶಾಲೆಗೆ ತೆರಳಲು ವಿದ್ಯಾರ್ಥಿಗಳು ಕೂಡ ಪರದಾಟ ನಡೆಸುತ್ತಿದ್ದರು. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ವಾಸವಿದ್ದು, ಮಳೆಗಾಲದಲ್ಲಂತೂ ಇಡೀ ಗ್ರಾಮ ಹೊರಜಗತ್ತಿನಿಂದ ಸಂಪರ್ಕ ಕಡಿದುಕೊಳ್ಳುತ್ತದೆ. ಗ್ರಾಮಕ್ಕೆ ಸೂಕ್ತ ರಸ್ತೆ ವ್ಯವಸ್ಥೆ ಸಹ ಇಲ್ಲವಾಗಿದ್ದು, ಕಳೆದ ಮೂರು ವರ್ಷಗಳಿಂದ ಮಳೆಯ ಪ್ರಮಾಣ ಹೆಚ್ಚಳವಾಗಿದ್ದರಿಂದ ವರ್ಷವಿಡೀ ಹೊಳೆಯ ನೀರಿನಲ್ಲೇ ಓಡಾಡಬೇಕಾದ ಸ್ಥಿತಿ ಇಲ್ಲಿನ ಗ್ರಾಮಸ್ಥರದ್ದಾಗಿದೆ. ಹೊನ್ನಾವರ ಪಟ್ಟಣದಿಂದ ಕೇವಲ 8 ಕಿಲೋ ಮೀಟರ್ ದೂರದಲ್ಲಿ ಹೊಸಾಕುಳಿ ಗ್ರಾಮವಿದ್ದು, ದಶಕಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸೇತುವೆ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು. ಪುಟ್ಟ ಬಾಲಕಿಯೋರ್ವಳು ತಮ್ಮ ಗ್ರಾಮಕ್ಕೆ ಸೇತುವೆ ನಿರ್ಮಿಸಿಕೊಡುವಂತೆ ಕೈಮುಗಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ಗೆ ಮನವಿ ಮಾಡಿಕೊಂಡಿದ್ದಳು. ಈ ಬಗ್ಗೆ 'ವಿಜಯ ಕರ್ನಾಟಕ' ವೆಬ್ ನ.20ರಂದು ವಿಸ್ತ್ರತ ವರದಿ ಪ್ರಕಟಿಸಿ, ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಗಮನ ಸೆಳೆಯುವ ಕಾರ್ಯ ಮಾಡಿತ್ತು. 'ವಿಕ' ವೆಬ್ ವರದಿಗೆ ಸ್ಪಂದಿಸಿದ ಕುಮಟಾ- ಹೊನ್ನಾವರ ಶಾಸಕ ದಿನಕರ ಶೆಟ್ಟಿ, ಹೊಸಾಕುಳಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಬರುವ ಮೇ ಅಂತ್ಯದೊಳಗೆ ಸೇತುವೆ ನಿರ್ಮಿಸಿಕೊಡುವ ಭರವಸೆ ಕೊಟ್ಟಿದ್ದಾರೆ. 2- 3 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಿಕೊಡುವುದಾಗಿ ಶಾಸಕ ಶೆಟ್ಟಿ ಭರವಸೆ ನೀಡಿದ್ದು, ಗ್ರಾಮಸ್ಥರ ಮೊಗದಲ್ಲಿ ಮಂದಹಾಸ ಮೂಡಿಸಿದೆ.


from India & World News in Kannada | VK Polls https://ift.tt/3Imy5Ve

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...