ಬೆಂಗಳೂರು: ವಿವಾದಿತ ಜಾರಿಗೆ ತರುವ ನಿಟ್ಟಿನಲ್ಲಿ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ನಿಟ್ಟಿನಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದೆ. ಮಸೂದೆಯ ಸಾಧಕ ಬಾಧಕಗಳ ಬಗ್ಗೆ ಇಗಾಗಲೇ ಚರ್ಚೆ ನಡೆದಿದ್ದು, ಅಂತಿಮ ಹಂತದ ರೂಪುರೇಷೆ ತಯಾರಾಗಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಎಲ್ಲಾ ಕಾಯ್ದೆಯನ್ನು ಅಧ್ಯಯನ ಮಾಡಲಾಗಿದ್ದು, ಆದರೆ ರಾಜ್ಯದಲ್ಲಿ ಜಾರಿಗೆ ತರುವ ಕಾಯ್ದೆ ಯಾವ ಸ್ವರೂಪದಲ್ಲಿ ಇರಲಿದೆ ಎಂಬುವುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹವನ್ನು ಸಂಘಪರಿವಾರದ ಸಂಘಟನೆಗಳು ಒತ್ತಡ ಹೇರುತ್ತಿವೆ. ಮತಾಂತರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮತಾಂತರ ನಿಷೇಧ ಪ್ರಸ್ತಾಪಿಸುವ ಖಾಸಗಿ ಮಸೂದೆಯನ್ನು ಮಂಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ಹೇಳಿದ್ದಾರೆ. ಇನ್ನು ಕಾಯ್ದೆ ಜಾರಿಗೆ ತರುವ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಮಾಹಿತಿ ನೀಡದೆ ಇದ್ದರೂ ಸಾಧ್ಯವಾದರೆ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುವುದಾಗಿ ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ನಡುವೆ ಉನ್ನತ ಮೂಲಗಳ ಮಾಹಿತಿಯ ಪ್ರಕಾರ, ಕಾಯ್ದೆ ಜಾರಿಗೆ ಸರ್ಕಾರ ತಯಾರಿ ನಡೆಸುತ್ತಿದ್ದು ಗೋಹತ್ಯೆ ಮಸೂದೆಯನ್ನು ಮಂಡನೆ ಮಾಡಿದ ರೀತಿಯಲ್ಲೇ ಯೋಜಿತವಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ವಿರೋಧ ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶಪೂರಿತ ಹೆಚ್ಚುವರಿ ತಿದ್ದುಪಡಿ ತರಲು ಕಾಂಗ್ರೆಸ್ ಪಕ್ಷದ ಸಂಪೂರ್ಣ ವಿರೋಧವಿದೆ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ, ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾಡ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ನಮ್ಮದು ಜಾತ್ಯತೀತ ದೇಶ, ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್ ಮೇಲಿನ ದಾಳಿ, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ಸರಿಯಲ್ಲ. ಸರಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದರು. ಇದರಿಂದ ರಾಜ್ಯದ ಗೌರವಕ್ಕೆ ಕುಂದು ಬರುವುದಲ್ಲದೆ, ಕಾನೂನು ಮತ್ತು ಸುವ್ಯವಸ್ಥೆಗೂ ಭಂಗವಾಗಲಿದೆ ಎಂದಿದ್ದಾರೆ.
from India & World News in Kannada | VK Polls https://ift.tt/3yaYXTL